
ಬೆಳಗಾವಿ: ಪೋಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳ ವರ್ಗಾವಣೆಯ ಅವಧಿಯನ್ನು ಒಂದು ವರ್ಷದ ಬದಲಾಗಿ 2 ವರ್ಷಕ್ಕೆ ಹೆಚ್ಚಿಸುವ ಮನವಿಯನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸುತ್ತಿದ್ದು, ಕ್ರಮವಹಿಸಲಿದೆ.
ಪೋಲೀಸ್ ಸಿಬ್ಬಂದಿಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯ ವೇಳೆಯಲ್ಲಿ ಮಾತನಾಡಿ, ಪೋಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೇವೆ ಸಲ್ಲಿಸುವ ಸ್ಥಳದಲ್ಲಿ ಒಂದು ವರ್ಷದ ಸೇವಾ ಅವಕಾಶವನ್ನು ನೀಡಲಾಗಿದೆ. ಅಪರಾಧ ಪ್ರಕರಣಗಳ ಪತ್ತೆ ಹಾಗೂ ಅಪರಾಧಿಗಳನ್ನು ಗುರುತಿಸಿ ಕ್ರಮವಹಿಸುವಲ್ಲಿ ಈ ಒಂದು ವರ್ಷ ಸಿಬ್ಬಂದಿಗಳಿಗೆ ಸಾಕಾಗುವುದಿಲ್ಲ. ಅವರ ಪರಿಣಾಮಕಾರಿ ಕರ್ತವ್ಯಕ್ಕೆ ಅನುಕೂಲವಾಗಲು ಕನಿಷ್ಠ ಎರಡು ವರ್ಷಗಳವರೆಗೆ ವರ್ಗಾವಣೆಯಿಂದ ವಿನಾಯಿತಿ ನೀಡಬೇಕು. ಈ ಕುರಿತು ಪೋಲೀಸ್ ಇಲಾಖೆ ನಿಯಮಗಳಿಗೆ ತಿದ್ದುಪಡಿ ತರಬೇಕೆಂದು ಅವರು ಆಗ್ರಹಿಸಿದರು.
ಇದಕ್ಕೆ ಗೃಹ ಸಚಿವರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿ, ಈ ಕುರಿತು ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಮತ್ತು ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.