
ಶಿವಮೊಗ್ಗ: ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.
ರಾಜ್ಯವನ್ನು ವ್ಯಸನಮುಕ್ತಗೊಳಿಸಲು ಆಂದೋಲನದ ರೀತಿಯಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಕಳೆದ ಸಾಲಿನಲ್ಲಿ ಟನ್ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿದ್ದು, ಕಳೆದ ತಿಂಗಳು ನಾಶಗೊಳಿಸಲಾಗಿದೆ. ಆದರೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರವಿಲ್ಲದೆ ಈ ಪಿಡುಗನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಸಹ ಮಾದಕ ವಸ್ತು ಸೇವನೆ ಪಿಡುಗು ನೇರ ಪರಿಣಾಮ ಬೀರುತ್ತದೆ. ಕೆಲವು ಬಾಹ್ಯ ಶಕ್ತಿಗಳು ಮಾದಕ ವಸ್ತುಗಳನ್ನು ದೇಶದೊಳಗೆ ತರುವ ಮೂಲಕ ಅಪರೋಕ್ಷ ಯುದ್ಧವನ್ನು ಸಹ ನಮ್ಮ ದೇಶದ ಮೇಲೆ ಹೂಡಲು ಪ್ರಯತ್ನಿಸುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮಾದಕ ವಸ್ತುಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ಮಟ್ಟಹಾಕಲು ಬದ್ಧವಾಗಿದೆ ಎಂದು ಸಚಿವರು ಹೇಳಿದರು.
ಶಿವಮೊಗ್ಗ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಂಘ ಸಂಸ್ಥೆಗಳ ಜತೆ ಕೈಜೋಡಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ವಿಶೇಷ ವಾರ್ಡ್:
ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನಮುಕ್ತತೆಗಾಗಿ ವಿಶೇಷ ವಾರ್ಡ್ ಈ ತಿಂಗಳ ಒಳಗಾಗಿ ಆರಂಭಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅರ್ಧದಲ್ಲೇ ಶಾಲೆ ಬಿಡುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಮಾದಕ ವಸ್ತು ಸೇವನೆ ಮಟ್ಟ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪದಾಧಿಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ರಘುರಾಜ್ ಹೆಚ್.ಕೆ…9449553305….


1 comment
**mitolyn reviews**
Mitolyn is a carefully developed, plant-based formula created to help support metabolic efficiency and encourage healthy, lasting weight management.